ಬೆಂಗಳೂರು: ನಾಮಕರಣ ಕಾರ್ಯಕ್ರಮಕ್ಕೆ ಪತ್ನಿ ಹಾಗೂ ಆಕೆಯ ಕುಟುಂಬಸ್ಥರು ನಿಗದಿತ ಸಮಯಕ್ಕಿಂತ ತಡವಾಗಿ ಬಂದಿದ್ದನ್ನು ಕಾರಣವಾಗಿಸಿಕೊಂಡು ಆಕ್ರೋಶಗೊಂಡ ಪತಿಯೊಬ್ಬ, ತನ್ನ 11 ತಿಂಗಳ ಸ್ವಂತ ಮಗುವನ್ನೇ ಬಲವಂತವಾಗಿ ಕಸಿದು ನೆಲಕ್ಕೆ ಎಸೆದ ಅಮಾನವೀಯ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಘಟನೆಯಲ್ಲಿ ಮಗುವಿನ ತಲೆಬುರುಡೆಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ.

ಮಾಹಿತಿಯ ಪ್ರಕಾರ, ನಗರದ ಕಲ್ಯಾಣ ಮಂಟಪವೊಂದರಲ್ಲಿ ಬೆಳಿಗ್ಗೆ ನಾಮಕರಣ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೆ ಪತ್ನಿ ಹಾಗೂ ಆಕೆಯ ತವರು ಮನೆಯವರು ಸುಮಾರು ಒಂದು ಗಂಟೆ ತಡವಾಗಿ ಆಗಮಿಸಿದ್ದರಿಂದ ಪತಿ ತೀವ್ರ ಆಕ್ರೋಶಗೊಂಡಿದ್ದ ಎನ್ನಲಾಗಿದೆ.

ಕಾರ್ಯಕ್ರಮಕ್ಕೆ ಆಗಮಿಸಿದ್ದ ನೂರಾರು ಅತಿಥಿಗಳ ಸಮ್ಮುಖದಲ್ಲೇ ಪತಿ ಪತ್ನಿಯೊಂದಿಗೆ ವಾಗ್ವಾದ ಆರಂಭಿಸಿ, ಎಲ್ಲರ ಮುಂದೆ ತನ್ನನ್ನು ಅವಮಾನಿಸಲಾಗಿದೆ ಎಂದು ಆರೋಪಿಸಿ ಹಲ್ಲೆ ನಡೆಸಿದ್ದಾನೆ. ಪರಿಸ್ಥಿತಿಯನ್ನು ನಿಯಂತ್ರಿಸಲು ಮುಂದಾದ ಪತ್ನಿಯ ತಂದೆಯ ಮೇಲೂ ಆತ ಹಲ್ಲೆಗೆ ಯತ್ನಿಸಿದ್ದಾನೆ.

ಈ ವೇಳೆ ಮಾವನ ಕಂಕುಳಲ್ಲಿದ್ದ 11 ತಿಂಗಳ ಮಗುವನ್ನು ಬಲವಂತವಾಗಿ ಕಸಿದುಕೊಂಡು ನೆಲಕ್ಕೆ ಎಸೆದಿದ್ದಾನೆ. ಪರಿಣಾಮ ಮಗು ತೀವ್ರವಾಗಿ ಬಿದ್ದು ತಲೆಗೆ ಗಂಭೀರ ಗಾಯಗಳಾಗಿವೆ. ಗಲಾಟೆ ತಡೆಯಲು ಮುಂದಾದ ಹೋಟೆಲ್ ಸಿಬ್ಬಂದಿಯ ಮೇಲೂ ಆರೋಪಿ ಹಲ್ಲೆ ನಡೆಸಿದ್ದು, ಓರ್ವ ಸಿಬ್ಬಂದಿಗೆ ಕಚ್ಚಿ ಗಾಯಗೊಳಿಸಿದ್ದಾನೆ ಎಂದು ತಿಳಿದುಬಂದಿದೆ.

ಘಟನೆಯ ಬಳಿಕ ಮಗುವಿನ ತಾಯಿ ನೀಡಿದ ದೂರಿನ ಮೇರೆಗೆ ಬೆಂಗಳೂರಿನ ಬನಶಂಕರಿ ಪೊಲೀಸ್ ಠಾಣೆಯಲ್ಲಿ ಪತಿ ಹಾಗೂ ಘಟನೆಯಲ್ಲಿ ಪ್ರಚೋದನೆ ನೀಡಿದ ಆರೋಪದಡಿ ಅತ್ತೆಯ ವಿರುದ್ಧ ಜುವೆನೈಲ್ ಜಸ್ಟಿಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಮಗುವಿನ ಆರೋಗ್ಯದ ಮೇಲೆ ವೈದ್ಯರು ನಿಗಾ ವಹಿಸಿದ್ದು, ಚಿಕಿತ್ಸೆ ಮುಂದುವರಿದಿದೆ.

Related News

error: Content is protected !!