ಬೆಂಗಳೂರು: ಸಾಲದ ಬಡ್ಡಿ ಹಾಗೂ ಕಂತಿನ ಹಣ ಪಾವತಿಸದಿದ್ದಕ್ಕೆ ಮಹಿಳೆಯೊಬ್ಬರನ್ನು ಅಪಹರಿಸಿ, ಹಲ್ಲೆ ನಡೆಸಿ ನಗ್ನಗೊಳಿಸಿದ ಆರೋಪದ ಬೆಚ್ಚಿಬೀಳಿಸುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಅಷ್ಟೇ ಅಲ್ಲದೆ, ಮಹಿಳೆಯ ನಗ್ನ ವಿಡಿಯೋ ಮಾಡಿಕೊಂಡು, ಹಣ ನೀಡದಿದ್ದರೆ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಲಾಗಿದೆ ಎನ್ನಲಾಗಿದೆ.
ಘಟನೆ ಸಂಬಂಧ ಚಂದ್ರಾ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರು ಮಹಿಳೆಯರು ಸೇರಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ರೇಷ್ಮಾ ಬಾನು, ನಝತ್ ಹಾಗೂ ಸುಹೇಲ್ ಬಂಧಿತ ಆರೋಪಿಗಳು.
ಪೊಲೀಸ್ ಮಾಹಿತಿ ಪ್ರಕಾರ, ಸಂತ್ರಸ್ತ ಮಹಿಳೆಗೆ ಆರೋಪಿ ರೇಷ್ಮಾ ಬಾನು ಪರಿಚಯವಿತ್ತು. ಸುಮಾರು ಎರಡು ವರ್ಷಗಳ ಹಿಂದೆ ಮಹಿಳೆ ರೇಷ್ಮಾ ಬಳಿ ಒಂದು ಲಕ್ಷ ರೂಪಾಯಿ ಸಾಲ ಪಡೆದಿದ್ದರು ಎನ್ನಲಾಗಿದೆ. ಇದೇ ವೇಳೆ ರೇಷ್ಮಾ ಮೂಲಕ ನಝತ್ ಪರಿಚಯವಾಗಿದ್ದು, ಆಕೆಯ ಬಳಿಯೂ ಸುಮಾರು 50 ಸಾವಿರ ರೂಪಾಯಿ ಸಾಲ ಪಡೆದಿದ್ದರು ಎಂದು ತಿಳಿದುಬಂದಿದೆ.
ನಝತ್ಗೆ ಪ್ರತಿ ತಿಂಗಳು 5 ಸಾವಿರ ರೂಪಾಯಿ ಕಂತಿನ ರೂಪದಲ್ಲಿ ಹಣ ಪಾವತಿಸುತ್ತಿದ್ದ ಮಹಿಳೆ, ರೇಷ್ಮಾಗೆ ಬಡ್ಡಿ ಹಣ ನೀಡುತ್ತಿದ್ದರು ಎನ್ನಲಾಗಿದೆ. ಆದರೆ ಆರ್ಥಿಕ ಸಮಸ್ಯೆಯಿಂದಾಗಿ ಕಳೆದ ಆರು ತಿಂಗಳಿಂದ ಬಡ್ಡಿ ಹಣ ಹಾಗೂ ಎರಡು ತಿಂಗಳಿಂದ ಕಂತಿನ ಹಣ ಪಾವತಿಸಲು ಸಾಧ್ಯವಾಗಿರಲಿಲ್ಲ.
ಹಣ ನೀಡುವಂತೆ ರೇಷ್ಮಾ ಪದೇಪದೇ ಕಿರುಕುಳ ನೀಡುತ್ತಿದ್ದಾಳೆ ಎಂದು ಆರೋಪಿಸಿ, ಸಂತ್ರಸ್ತ ಮಹಿಳೆ ಆಕೆಯ ಮೊಬೈಲ್ ಸಂಖ್ಯೆಯನ್ನು ಬ್ಲಾಕ್ ಮಾಡಿದ್ದರು. ಬಳಿಕ ವಾಸವಿದ್ದ ಮನೆ ಖಾಲಿ ಮಾಡಿಕೊಂಡು ತಾಯಿಯ ಮನೆಗೆ ತೆರಳಿದ್ದರು.
ಈ ನಡುವೆ, ಕೆಲಸವೊಂದಿದೆ ಹಾಗೂ ಹಣ ಸಿಗಲಿದೆ ಎಂದು ಹೇಳಿ ನಝತ್ ಮಹಿಳೆಯನ್ನು ತನ್ನ ಮನೆಗೆ ಕರೆಸಿಕೊಂಡಿದ್ದಾಳೆ ಎನ್ನಲಾಗಿದೆ. ಮಹಿಳೆ ಅಲ್ಲಿಗೆ ತೆರಳಿದ ಬಳಿಕ ರೇಷ್ಮಾ ಬಾನು ಹಾಗೂ ಆಕೆಯ ಪತಿ ಸುಹೇಲ್ ಕೂಡ ಅಲ್ಲಿಗೆ ಬಂದಿದ್ದಾರೆ. ಬಳಿಕ ಮೂವರು ಸೇರಿ ಮಹಿಳೆಯ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಆರೋಪಿಗಳು ಚಾಕುವಿನಿಂದ ಹಲ್ಲೆ ನಡೆಸಿದ ಬಳಿಕ ಮಹಿಳೆಯನ್ನು ಆಟೋದಲ್ಲಿ ಕರೆದೊಯ್ದು ಅಪಹರಿಸಿದ್ದಾರೆ ಎನ್ನಲಾಗಿದೆ. ನಂತರ ಕುಂಬಳಗೋಡು ಸಮೀಪದ ಮನೆಯೊಂದರಲ್ಲಿ ಆಕೆಯನ್ನು ಕೂಡಿ ಹಾಕಿ ಹಲ್ಲೆ ನಡೆಸಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ.
ಇಷ್ಟಕ್ಕೇ ನಿಲ್ಲದ ಆರೋಪಿಗಳು ಮಹಿಳೆಯನ್ನು ನಗ್ನಗೊಳಿಸಿ ವಿಡಿಯೋ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಹಣ ನೀಡದಿದ್ದರೆ ಆ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದರು ಎಂದು ಸಂತ್ರಸ್ತ ಮಹಿಳೆ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
ಇತ್ತ ಮಗಳು ಕಾಣೆಯಾಗಿರುವುದನ್ನು ಗಮನಿಸಿದ ಸಂತ್ರಸ್ತೆಯ ತಾಯಿ ಚಂದ್ರಾ ಲೇಔಟ್ ಪೊಲೀಸ್ ಠಾಣೆಗೆ ತೆರಳಿ ಮಿಸ್ಸಿಂಗ್ ಕಂಪ್ಲೆಂಟ್ ನೀಡಿದ್ದರು. ದೂರಿನ ಆಧಾರದ ಮೇಲೆ ತನಿಖೆ ಆರಂಭಿಸಿದ ಪೊಲೀಸರು ಮಹಿಳೆಯ ಸುಳಿವು ಪತ್ತೆಹಚ್ಚಿ ಆಕೆಯನ್ನು ರಕ್ಷಿಸಿದ್ದಾರೆ.
ಬಳಿಕ ಸಂತ್ರಸ್ತ ಮಹಿಳೆಯಿಂದ ದೂರು ಪಡೆದು ಪ್ರಕರಣ ದಾಖಲಿಸಿಕೊಂಡ ಪೊಲೀಸರು ರೇಷ್ಮಾ ಬಾನು, ನಝತ್ ಹಾಗೂ ಸುಹೇಲ್ ಅವರನ್ನು ಬಂಧಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಚಂದ್ರಾ ಲೇಔಟ್ ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.
ಸೂರ್ಯಾಪೇಟೆ: ಅನೈತಿಕ ಸಂಬಂಧಕ್ಕೆ ಪತಿ ಅಡ್ಡಿಯಾಗಿದ್ದಾನೆ ಎಂಬ ಕಾರಣಕ್ಕೆ ಪತಿಯನ್ನೇ ಕೊಲೆ ಮಾಡಲು ಪತ್ನಿ ಹಾಗೂ ಆಕೆಯ ಕುಟುಂಬಸ್ಥರು ಸಂಚು…
ಸೋನ್ಭದ್ರ: ಗಂಡ ನೈಟ್ ಡ್ಯೂಟಿಗೆ ಹೋದ ಬಳಿಕ ಮಕ್ಕಳಿಗೆ ನಿದ್ರೆ ಮಾತ್ರೆ ನೀಡಿ, ಪ್ರಿಯಕರನನ್ನು ಮನೆಗೆ ಕರೆಸಿಕೊಳ್ಳುತ್ತಿದ್ದ ಪತ್ನಿ, ಕೊನೆಗೆ…
ಗೌರಿಬಿದನೂರು: ರೈಲ್ವೆ ಇಲಾಖೆಯ ಕಾಮಗಾರಿ ಕೆಲಸಕ್ಕೆ ತೆರಳುತ್ತಿದ್ದ ಕೂಲಿ ಕಾರ್ಮಿಕರಿದ್ದ ಬೊಲೆರೋ ವಾಹನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾದ…
ಹುಬ್ಬಳ್ಳಿ–ಧಾರವಾಡ: ಅವಳಿ ನಗರದಲ್ಲಿ ಮಾದಕ ವಸ್ತುಗಳ ಜಾಲವನ್ನು ಬೇರುಸಹಿತ ಕಿತ್ತುಹಾಕಲು ಹುಬ್ಬಳ್ಳಿ–ಧಾರವಾಡ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸುತ್ತಿದ್ದು, ಕಳೆದ ಮೂರು…
ಸಾಗರ: ಜಮೀನಿಗೆ ಅಕ್ರಮವಾಗಿ ವಿದ್ಯುತ್ ತಂತಿ ಅಳವಡಿಸಿ ಎರಡು ಗಂಡು ಜಿಂಕೆಗಳನ್ನು ವಿದ್ಯುತ್ ಸ್ಪರ್ಶದಿಂದ ಸಾಯಿಸಿ, ಅವುಗಳ ಮಾಂಸವನ್ನು ಜಮೀನಿನಲ್ಲೇ…
ಕುಮಟಾ: ನಗರದ ಪ್ರಸಿದ್ಧ ಕುಂಭೇಶ್ವರ ದೇವಸ್ಥಾನದ ಅರ್ಚಕ ವಿಶ್ವೇಶ್ವರ ಭಟ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರವಾರ ಜಿಲ್ಲಾ ಮತ್ತು…