ಹುಬ್ಬಳ್ಳಿ: ನಗರದ ಲೋಕಪ್ಪನ ಹಕ್ಕಲ ರೈಲ್ವೆ ಸೇತುವೆ ಸಮೀಪ ರೈಲ್ವೆ ಹಳಿ ಪಕ್ಕದಲ್ಲಿ 25 ವರ್ಷದ ಯುವಕನ ಶವ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಮೃತನನ್ನು ಗೋಪನಕೊಪ್ಪದ ಸ್ವಾಗತ್ ಕಾಲೋನಿಯ ನಿವಾಸಿ ವಿನೋದ್ ಮಂಡಲ್ ಎಂದು ಗುರುತಿಸಲಾಗಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಅಶೋಕ್ ನಗರ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬೆರಳಚ್ಚು ತಜ್ಞರ ತಂಡವೂ ಸ್ಥಳ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಸುಮಾರು ಒಂದು ತಿಂಗಳ ಹಿಂದೆ ಪತ್ನಿಯೊಂದಿಗೆ ಉಂಟಾದ ಕುಟುಂಬ ಕಲಹದ ಹಿನ್ನೆಲೆಯಲ್ಲಿ ಆಕೆ ಮನೆ ಬಿಟ್ಟು ಹೋಗಿದ್ದಳು ಎನ್ನಲಾಗಿದೆ. ಈ ಘಟನೆಯ ಬಳಿಕ ವಿನೋದ್ ಮಾನಸಿಕವಾಗಿ ನೊಂದಿದ್ದಲ್ಲದೆ, ಗಾಂಜಾ ಹಾಗೂ ಫೆವಿಕಾಲ್ ಸೊಲ್ಯೂಷನ್ ವ್ಯಸನಕ್ಕೆ ಒಳಗಾಗಿದ್ದ ಎಂಬ ಮಾಹಿತಿ ಕೇಳಿಬಂದಿದೆ.
ಘಟನಾ ಸ್ಥಳದ ಸಮೀಪ ಕೆಲವು ಮಾದಕ ವಸ್ತುಗಳು ಪತ್ತೆಯಾಗಿದ್ದು, ಅವು ಪ್ರಕರಣಕ್ಕೆ ಸಂಬಂಧ ಹೊಂದಿದೆಯೇ ಎಂಬುದನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ. ಸದ್ಯ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.
ಈ ಕುರಿತು ಅಶೋಕ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇದು ಆತ್ಮಹತ್ಯೆಯೋ ಅಥವಾ ಬೇರೆ ಯಾವುದೇ ಕಾರಣವೋ ಎಂಬ ಎಲ್ಲ ಆಯಾಮಗಳಲ್ಲಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ವರದಿ: ಶಿವರಾಜ್ ಪಿ.ಆರ್.
